ನೇಪಾಳದಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,500ಕ್ಕೂ ಹೆಚ್ಚು ಮಂದಿ ನಾಪತ್ತೆ
ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಸಾವಿನ ಸಂಖ್ಯೆ 469ಕ್ಕೆ ಏರಿಕೆಯಾಗಿದೆ. ಇತ್ತೀಚಿನ ವರ್ಷಗಳಲ್ಲಿ ನೇಪಾಳ ಕಂಡ ಅತ್ಯಂತ ಭೀಕರ ನೈಸರ್ಗಿಕ ವಿಕೋಪಗಳಲ್ಲಿ ಇದು ಒಂದಾಗಿದ್ದು, ನಾಪತ್ತೆಯಾದ ಸಾವಿರಾರು ಜನರಿಗಾಗಿ ರಕ್ಷಣಾ ಪಡೆಗಳು ಸಮರೋಪಾದಿಯಲ್ಲಿ ಹುಡುಕಾಟ ನಡೆಸುತ್ತಿವೆ. ನೇಪಾಳ ಮತ್ತು ಟಿಬೆಟ್ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಸುಮಾರು 1,500ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಇದರಲ್ಲಿ 285 ಭಾರತೀಯ ಪ್ರವಾಸಿಗರು ಸೇರಿರುವುದು ಆತಂಕಕ್ಕೆ ಕಾರಣವಾಗಿದೆ. ಕೇವಲ ಭಾರತ ಮಾತ್ರವಲ್ಲದೆ ಅಮೆರಿಕ, ಮಲೇಷ್ಯಾ, ಉಕ್ರೇನ್, ಆಸ್ಟ್ರೇಲಿಯಾ, ಬ್ರಿಟನ್, ಕೆನಡಾ, ದಕ್ಷಿಣ ಕೊರಿಯಾ, ಸಿಂಗಾಪುರ, ಜರ್ಮನಿ ಮತ್ತು ರಷ್ಯಾ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ದೇಶಗಳ ಪ್ರಜೆಗಳು ನಾಪತ್ತೆಯಾದವರ ಪಟ್ಟಿಯಲ್ಲಿದ್ದಾರೆ. 93ಕ್ಕೂ ಹೆಚ್ಚು ಮೃತದೇಹಗಳನ್ನು ಹೊರ-ತೆಗೆಯಲಾಗಿದೆ.
ಹಿಮಾಲಯ ಪ್ರದೇಶದಲ್ಲಿ ಭಾರೀ ಪ್ರಕೃತಿ ವಿಕೋಪ
ಪ್ರವಾಹದ ಪ್ರಮುಖ ಪರಿಣಾಮ ರಸುವಾ ಜಿಲ್ಲೆ ಮತ್ತು ಬೋಟೆಕೋಶಿ ನದಿ ಪ್ರದೇಶದಲ್ಲಿ ಕಂಡುಬಂದಿದೆ. ಟಿಬೆಟ್ ಭಾಗದಿಂದ ಬಂದ ಭಾರೀ ನೀರು ಮತ್ತು ಅವಶೇಷಗಳು ನದಿಯ ಹರಿವನ್ನು ಏಕಾಏಕಿ ಹೆಚ್ಚಿಸಿದ್ದು, ಹಲವು ಪ್ರದೇಶಗಳಲ್ಲಿ ಭಾರಿ ಪ್ರಮಾಣದ ಹಾನಿಯಾಗಿದೆ. ಪ್ರವಾಹದ ನೀರಿನೊಂದಿಗೆ ಮಣ್ಣು, ಕಲ್ಲು ಮತ್ತು ಇತರ ಅವಶೇಷಗಳು ಕೆಳಭಾಗಕ್ಕೆ ಹರಿದುಬಂದಿವೆ.

ಟಿಬೆಟ್ನ ಗ್ಯಿರಾಂಗ್ ಪ್ರದೇಶದಲ್ಲಿಯೂ ಭೂಕುಸಿತ ಮತ್ತು ಪ್ರವಾಹದಿಂದ ಭಾರೀ ಹಾನಿಯಾಗಿದೆ. ಕೆಲವು ಕಡೆ ರಸ್ತೆಗಳು ಮತ್ತು ಸೇತುವೆಗಳು ನಾಶವಾಗಿರುವುದರಿಂದ ಸಂಪರ್ಕ ಕಡಿತಗೊಂಡಿದ್ದು, ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪುವುದೇ ದೊಡ್ಡ ಸವಾಲಾಗಿದೆ.
ಭಾರತೀಯರ ರಕ್ಷಣೆಗೆ ವಿಶೇಷ ಪ್ರಯತ್ನ
ಭಾರತೀಯ ನಾಗರಿಕರ ಸುರಕ್ಷತೆಗಾಗಿ ಭಾರತದ ವಿದೇಶಾಂಗ ಸಚಿವಾಲಯ ಮತ್ತು ಕಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರ ಕಚೇರಿ ನೇಪಾಳ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಪ್ರವಾಹದಲ್ಲಿ ಸಿಲುಕಿರುವ ಭಾರತೀಯರನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಕರೆತರುವ ಪ್ರಯತ್ನಗಳು ನಡೆಯುತ್ತಿವೆ. ಈಗಾಗಲೇ ಕೆಲವು ಭಾರತೀಯರನ್ನು ರಕ್ಷಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ನಾಪತ್ತೆಯಾದವರಲ್ಲಿ ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಭಾರತೀಯ ಯಾತ್ರಿಕರು ಕೂಡ ಸೇರಿದ್ದಾರೆ. ತಮಿಳುನಾಡು, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳ ಯಾತ್ರಿಕರು ಮತ್ತು ಪ್ರವಾಸಿಗರು ಸಂಪರ್ಕಕ್ಕೆ ಸಿಗದಿರುವ ಬಗ್ಗೆ ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ತೀವ್ರ
ನೇಪಾಳ ಸೇನೆ, ಪೊಲೀಸರು ಮತ್ತು ಸ್ಥಳೀಯ ರಕ್ಷಣಾ ತಂಡಗಳು ಹೆಲಿಕಾಪ್ಟರ್ಗಳು, ಶೋಧನಾ ತಂಡಗಳು, ಶ್ವಾನ ದಳಗಳು ಹಾಗೂ ಭಾರಿ ಯಂತ್ರೋಪಕರಣಗಳನ್ನು ಬಳಸಿಕೊಂಡು ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಸುತ್ತಿವೆ. ಇದುವರೆಗೆ ನೂರಾರು ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಆದರೆ ಪ್ರವಾಹದ ನೀರಿನ ವೇಗ, ಮಣ್ಣು ಮತ್ತು ಅವಶೇಷಗಳು, ಹಾನಿಗೊಳಗಾದ ರಸ್ತೆಗಳು ಹಾಗೂ ಸೇತುವೆಗಳು ಕಾರ್ಯಾಚರಣೆಗೆ ಅಡ್ಡಿಯಾಗಿವೆ.
